
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಕಲ್ಲುತೂರಾಟ, ಗಲಭೆ ಪ್ರಕರಣಕ್ಕೆ ಸರ್ಕಾರವೇ ನೇರ ಹೊಣೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದ ಫಲ ಎಂದು ಬಿಜೆಪಿ ಆರೋಪಿಸಿದೆ. ಗಲಾಟೆಗಳ ಮೂಲಕ ಬಿಜೆಪಿಗರು ಲಾಭ ಪಡೆಯಲು ಹೊರಟಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಲಾಭ ಪಡೆದುಕೊಳ್ಳುವುದೇ ಉದ್ದೇಶ. ಅವರಿಗೆ ಗಲಾಟೆಗಳು ಆಗಬೇಕು, ಹಿಂಸಾತ್ಮಕ ಘಟನೆಗಳು ನಡೆಯಬೇಕು ಇದರಿಂದ ಲಾಭ ಪಡೆಯಲು ಹೊರಟಿದ್ದಾರೆ ಎಂದು ಟೀಕಿಸಿದರು.
ಹೈಲೈಟ್ಸ್:
- ಶಿವಮೊಗ್ಗ ಗಲಭೆ: ಬಿಜೆಪಿಯವರಿಗೆ ರಾಜಕೀಯ ಲಾಭ ಪಡೆದುಕೊಳ್ಳುವುದೇ ಉದ್ದೇಶ ಎಂದು ದಿನೇಶ್ ಗುಂಡೂರಾವ್ ಆರೋಪ
- ಬಿಜೆಪಿಯವರಿಗೆ ಗಲಾಟೆಗಳು ಆಗಬೇಕು,ಇದರಿಂದ ಲಾಭ ಪಡೆಯಲು ಹೊರಟಿದ್ದಾರೆ ಎಂದು ಟೀಕೆ
- ಯಾರೇ ತಪ್ಪು ಮಾಡಿದರೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಬೆಂಗಳೂರು: ಗಲಾಟೆಗಳ ಮೂಲಕ ಬಿಜೆಪಿಗರು ಲಾಭ ಪಡೆಯಲು ಹೊರಟಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ವಿಧಾನಸೌಧದಲ್ಲಿ ಗುರುವಾರ ಮಾತನಾಡಿದ ಅವರು, ಶಿವಮೊಗ್ಗಕ್ಕೆ ಬಿಜೆಪಿ ಸತ್ಯ ಶೋಧನ ಸಮಿತಿ ಭೇಟಿ ವಿಚಾರವಾಗಿ, ಬಿಜೆಪಿಯವರಿಗೆ ರಾಜಕೀಯ ಲಾಭ ಪಡೆದುಕೊಳ್ಳುವುದೇ ಉದ್ದೇಶ. ಅವರಿಗೆ ಗಲಾಟೆಗಳು ಆಗಬೇಕು, ಹಿಂಸಾತ್ಮಕ ಘಟನೆಗಳು ನಡೆಯಬೇಕು ಇದರಿಂದ ಲಾಭ ಪಡೆಯಲು ಹೊರಟಿದ್ದಾರೆ ಎಂದರು
ಈಗಾಗಲೇ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಯಾರೇ ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡಿದೆ. ಬಿಜೆಪಿಯವರಿಗೆ ಶಾಂತಿ ನೆಲೆಸುವುದು ಬೇಕಿಲ್ಲ. ಇಂತಹ ಘಟನೆಗಳಿಗಾಗಿಯೇ ಕಾಯುತ್ತಿರುತ್ತಾರೆ. ಬೆಂಕಿ ಹಚ್ಚಲು ಹೋಗುತ್ತಾರೆ ಎಂದು ಬಿಜೆಪಿ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದರು.
ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಶಾಮನೂರು ಶಿವಶಂಕರಪ್ಪ ಹಿರಿಯ ನಾಯಕರು. ಅವರು ಹೇಳಿದ ರೀತಿಯಲ್ಲಿ ಆಗುತ್ತಿಲ್ಲ. ಅವರಿಗೆ ಮಾಹಿತಿ ಕೊರತೆ ಇರಬಹುದು ಎಂದರು. ನಮ್ಮ ಸರ್ಕಾರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಯಾವುದೇ ಒಂದು ಜಾತಿಗೆ ಸೀಮಿತವಾಗದೆ ಒಟ್ಟಿಗೆ ಹೋಗುತ್ತಿದ್ದೇವೆ ಎಂದರು.
ಪಕ್ಷ ಹಾಗೂ ಸರ್ಕಾರದ ಹಂತದಲ್ಲಿ ಎಲ್ಲಾ ಸಮುದಾಯವರಿಗೂ ಆದ್ಯತೆ ನೀಡಲಾಗಿದೆ. ಆದರೆ ಯಾವ ದೃಷ್ಟಿಯಿಂದ ಹೇಳಿದ್ದಾರೋ ಗೊತ್ತಿಲ್ಲ. ಬಸವರಾಜ್ ರಾಯರೆಡ್ಡಿ ಅವರೇ ಪೂರ್ಣ ದಾಖಲೆ ಬಿಡುಗಡೆ ಮಾಡಿದ್ದಾರೆ ಎಂದು ತಿಳಿಸಿದರು.
